ಸೂಫಿ ಸಂತರ ದರ್ಗಾಗಳ ಅಭಿವೃದ್ಧಿಗೆ ವಿಶೇಷ ವೇದಿಕೆ: ಸಮಸ್ಯೆಗಳ ಪರಿಹಾರಕ್ಕೆ ಬದ್ಧತೆ – ಫಯಾಜ್ ಅಹ್ಮದ್
ಹೊಸಪೇಟೆ/ವಿಜಯನಗರ :
ನಗರದ ಖಾಸಗಿ ಹೋಟೆಲ್ನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸೂಫಿ ಸಂತರ ವಂಶಸ್ಥರು, ದರ್ಗಾಗಳ ಮುಖ್ಯಸ್ಥರು ಹಾಗೂ ಮುಸ್ಲಿಂ ಸಮಾಜದ ಮುಖಂಡರ ನೇತೃತ್ವದಲ್ಲಿ ದರ್ಗಾಗಳಲ್ಲಿನ ವಿವಿಧ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಚಾರಗಳ ಕುರಿತು ಸಮಾಲೋಚನಾ ಸಭೆ ನಡೆಯಿತು.

ಸಮಾಜ ಸೇವಕ ಫಯಾಜ್ ಅಹ್ಮದ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸೂಫಿ ಸಂತರ ಕುಟುಂಬಸ್ಥರು, ದರ್ಗಾ ಮುಖ್ಯಸ್ಥರು ಹಾಗೂ ಸಮಾಜದ ಗಣ್ಯರು ಭಾಗವಹಿಸಿದ್ದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಫಯಾಜ್ ಅಹ್ಮದ್ ಅವರು, “ಸೂಫಿ ಸಂತರ ದರ್ಗಾಗಳಲ್ಲಿ ಕಂಡುಬರುವ ವಿವಿಧ ಸಮಸ್ಯೆಗಳು ಮತ್ತು ಕೊರತೆಗಳನ್ನು ಗುರುತಿಸಿ, ಅವುಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಈ ವೇದಿಕೆಯನ್ನು ರೂಪಿಸಲಾಗಿದೆ. ದರ್ಗಾಗಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೂ ಈ ವೇದಿಕೆಯ ಮೂಲಕ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಲು ಪ್ರಯತ್ನಿಸಲಾಗುವುದು” ಎಂದು ಹೇಳಿದರು.

ಸೂಫಿ ಸಂತರು ತಮ್ಮ ಸಂಪೂರ್ಣ ಜೀವನವನ್ನು ಮಾನವಕುಲದ ಕಲ್ಯಾಣಕ್ಕಾಗಿ ಸಮರ್ಪಿಸಿದ್ದು, ಅವರ ತ್ಯಾಗ, ಸೇವೆ ಮತ್ತು ಭಾವೈಕ್ಯತೆಯ ಸಂದೇಶ ಇಂದಿಗೂ ಸಮಾಜಕ್ಕೆ ಮಾರ್ಗದರ್ಶಿಯಾಗಿದೆ. ಸರ್ವಧರ್ಮೀಯರು ಶತಮಾನಗಳಿಂದ ದರ್ಗಾಗಳಿಗೆ ಭೇಟಿ ನೀಡುತ್ತಿರುವುದು ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂಕೇತವಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಹೊಸಪೇಟೆ ಕ್ಷೇತ್ರದ ಶಾಸಕ ಎಚ್.ಆರ್. ಗವಿಯಪ್ಪ ಅವರು ಮಾತನಾಡಿ, “ಸೂಫಿ ಸಂತರ ಸಂದೇಶವು ಸಮಾಜದಲ್ಲಿ ಶಾಂತಿ, ಸಹಿಷ್ಣುತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಇಂತಹ ವೇದಿಕೆಗಳ ಮೂಲಕ ಅವರ ಕೊಡುಗೆಗಳನ್ನು ನೆನಪಿಸಿಕೊಳ್ಳುವುದು ಶ್ಲಾಘನೀಯ ಕಾರ್ಯ. ಕ್ಷೇತ್ರದ ಶಾಸಕನಾಗಿ ನಿಮ್ಮ ಅಭಿವೃದ್ಧಿ ಹಾಗೂ ಧಾರ್ಮಿಕ ಕ್ಷೇತ್ರಗಳ ಸಮಸ್ಯೆಗಳ ಪರಿಹಾರಕ್ಕಾಗಿ ನನ್ನ ಸಂಪೂರ್ಣ ಸಹಕಾರ ಸದಾ ಇರುತ್ತದೆ” ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಎಚ್.ಆರ್. ಗವಿಯಪ್ಪ ಅವರನ್ನು ವಿಶೇಷವಾಗಿ ಆಹ್ವಾನಿಸಿ ಸನ್ಮಾನಿಸಿ ಸ್ವಾಗತಿಸಲಾಯಿತು.
ಸಭೆಯಲ್ಲಿ ಸೂಫಿ ಸಂತರ ವಂಶಸ್ಥರು, ವಿವಿಧ ದರ್ಗಾಗಳ ಮುಖ್ಯಸ್ಥರು, ಮುಸ್ಲಿಂ ಸಮಾಜದ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ವರದಿ : ಮಹಮ್ಮದ್ ಗೌಸ್
